ಎಸೆಸೆಲ್ಸಿ ಪರೀಕ್ಷೆಗೆ 25 ಸಾವಿರ ವಿದ್ಯಾರ್ಥಿಗಳ ಗೈರು: ತಕ್ಷಣವೇ ಮರು ಪರೀಕ್ಷೆಗೆ ರಾಜ್ಯ ಸರಕಾರಕ್ಕೆ ಮನವಿ
ಕೃಪೆ:ವಾರ್ತಾಭಾರತಿ..
ಬೆಂಗಳೂರು, ಎ.1: ವಿದ್ಯಾರ್ಥಿಗಳ ಶೈಕ್ಷಣಿಕ ಮುಂದಿನ ಭವಿಷ್ಯವನ್ನು ನಿರ್ಧರಿಸುವ ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷೆಗೆ 25 ಸಾವಿರ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂಬ ಆಘಾತಕಾರಿ ಅಂಶವೊಂದು ‘ಸರಕಾರಿ ಶಾಲೆ ಉಳಿಸಿ-ಬೆಳೆಸಿ ಸಮಿತಿ’ ಬಹಿರಂಗಗೊಳಿಸಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಸರಕಾರಿ ಮತ್ತು ಖಾಸಗಿ ಪ್ರೌಢ ಶಾಲೆಗಳಿಗೆ ಶೇಕಡ ನೂರಕ್ಕೆ ನೂರರಷ್ಟು ಫಲಿತಾಂಶವನ್ನು ತರಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದ ಹಿನ್ನೆಲೆಯೇ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಲು ಮುಖ್ಯ ಕಾರಣ ಎಂದು ಸಮಿತಿಯ ರಾಜ್ಯಾಧ್ಯಕ್ಷ ಪ್ರಕಾಶ್ ಅಂಚಿನ್ ಆರೋಪಿಸಿದ್ದಾರೆ.
ಮಕ್ಕಳ ಶಿಕ್ಷಣ ಹಕ್ಕನ್ನು ಕಾಪಾಡುವ ನಿಟ್ಟಿನಲ್ಲಿ ಎಸೆಸೆಲ್ಸಿ ಪರೀಕ್ಷೆಗೆ ಗೈರು ಹಾಜರಾದ 25 ಸಾವಿರ ವಿದ್ಯಾರ್ಥಿಗಳಿಗೆ ತಕ್ಷಣವೇ ಮರು ಪರೀಕ್ಷೆ ನಡೆಸಲು ಸರಕಾರ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡದ ಶಾಲೆಗಳ ಅನುಮತಿ ವಾಪಸ್ ಪಡೆಯಬೇಕು. ಸರಕಾರಿ ಶಾಲೆಗಳಲ್ಲಿ ಇಂತಹ ಸ್ಥಿತಿಗೆ ಕಾರಣರಾದವರನ್ನು ಕೂಡಲೇ ಅಮಾನತು ಮಾಡಬೇಕು. ಇಲ್ಲವಾದರೆ ಮಕ್ಕಳ ಶೈಕ್ಷಣಿಕ ಹಕ್ಕನ್ನು ರಕ್ಷಿಸಲು ಸರಕಾರಿ ಶಾಲೆ ಉಳಿಸಿ-ಬೆಳೆಸಿ ಸಮಿತಿಯಿಂದ ರಾಜ್ಯಾದ್ಯಂತ ಹೋರಾಟ ರೂಪಿಸಬೇಕಾಗುತ್ತದೆ ಎಂದು ಪ್ರಕಾಶ್ ಅಂಚಿನ್ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸಲ್ಲಿಸಿರುವ ಮನವಿಯಲ್ಲಿ ಎಚ್ಚರಿಸಿದ್ದಾರೆ.

No comments
Post a Comment