ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ: ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ :ಡಿಸಿ

No comments

ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ; ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಿ: ಡಿಸಿ
     ಮಡಿಕೇರಿ -ನಗರದ ಸಂತ ಜೋಸೆಫರ ಶಾಲೆಯಲ್ಲಿ ನಡೆದ ಲೋಕಸಭಾ ಚುನಾವಣಾ ತರಬೇತಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸೋಮವಾರ ಭೇಟಿ ನೀಡಿ ಮತದಾನದಂದು ಮತಗಟ್ಟೆ ಕೇಂದ್ರಗಳಲ್ಲಿ ಮತಗಟ್ಟೆ ಅಧಿಕಾರಿಗಳು ಪಾಲಿಸಬೇಕಾದ ಚುನಾವಣಾ ಕಾರ್ಯಗಳ ಬಗ್ಗೆ ಹಲವು ಮಾಹಿತಿ ನೀಡಿದರು.    
     ಮತಗಟ್ಟೆ ಅಧಿಕಾರಿಗಳು ಒಬ್ಬರಿಗೊಬ್ಬರು ಪರಿಚಯ ಮಾಡಿಕೊಂಡು, ತಂಡವಾಗಿ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ  ಅವರು ನಿರ್ದೇಶನ ನೀಡಿದರು.  
     ಇದೇ ಏಪ್ರಿಲ್, 18 ರ ಮತದಾನದಂದು ಮತಗಟ್ಟೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು. ಈ ಬಾರಿ 22 ಮಂದಿ ಅಭ್ಯರ್ಥಿಗಳು ಕಣದಲ್ಲಿರುವುದರಿಂದ ಎರಡು ಬ್ಯಾಲೆಟ್ ಯುನಿಟ್ ಬಳಸಲಾಗುತ್ತದೆ. ಆದ್ದರಿಂದ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು. 
     ವಿದ್ಯುನ್ಮಾನ ಮತಯಂತ್ರಗಳ ಕಾರ್ಯನಿರ್ವಹಣೆ ಹಾಗೂ ಚಟುವಟಿಕೆ ಬಗ್ಗೆ ಸಂಶಯವಿದ್ದಲ್ಲಿ ಪರಿಹರಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು.  
     ಚುನಾವಣೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಶಾಂತಿಯುತ ಹಾಗೂ ವ್ಯವಸ್ಥಿತ ಚುನಾವಣೆಗೆ ಎಲ್ಲರೂ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು.
     ನಗರದ ಸಂತ ಜೋಸೆಫರ ಶಾಲೆ ಹಾಗೂ ವಿರಾಜಪೇಟೆ ಸಂತ ಅನ್ನಮ್ಮ ಶಾಲೆಯಲ್ಲಿ ಎರಡು ದಿನಗಳ ಕಾಲ ಮತಗಟ್ಟೆ ಅಧಿಕಾರಿಗಳಿಗೆ ನಡೆದ ತರಬೇತಿ ಕಾರ್ಯಕ್ರಮದಲ್ಲಿ ತಲಾ 15 ಕೊಠಡಿಗಳಂತೆ, ಒಂದು ಕೊಠಡಿಗೆ 50 ಮಂದಿಯಂತೆ ಮತಗಟ್ಟೆ ಅಧಿಕಾರಿಗಳಿಗೆ ಪ್ರತ್ಯೇಕವಾಗಿ ತರಬೇತಿ ನೀಡಲಾಯಿತು.
    ಹಾಗೆಯೇ ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು ಅವರು ವಿರಾಜಪೇಟೆಯ ಸಂತ ಅನ್ನಮ್ಮ ಶಾಲೆಗೆ ಸೋಮವಾರ ಭೇಟಿ ನೀಡಿ ಚುನಾವಣೆ ಸಂಬಂಧ ಮತಗಟ್ಟೆ ಅಧಿಕಾರಿಗಳಿಗೆ ಹಲವು ಮಾಹಿತಿ ನೀಡಿದರು.   
    ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಸಹಾಯಕ ಚುನಾವಣಾಧಿಕಾರಿ ಶ್ರೀನಿವಾಸ್, ಮಾಸ್ಟರ್ ತರಬೇತಿದಾರರಾದ ಷಂಶುದ್ದಿನ್, ತಹಶೀಲ್ದಾರರಾದ ನಟೇಶ್, ಗೊವಿಂದರಾಜು ಇತರರು ಇದ್ದರು.

No comments

Post a Comment