ಮನೆಗಳ ನಿರ್ಮಾಣ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ : ಅನ್ಬುಕುಮಾರ್
ಮಡಿಕೇರಿ ಏ.೧೧ : ಪ್ರಕೃತಿ ವಿಕೋಪದಡಿ ನಿರ್ಮಾಣವಾಗುತ್ತಿರುವ ಮನೆಗಳ ನಿರ್ಮಾಣ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್ ಅವರು ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾಹಿತಿ ನೀಡಿದರು.
ಮದೆನಾಡಿನಲ್ಲಿ ಏಪ್ರಿಲ್, ೩೦ ರೊಳಗೆ ಮನೆಗಳ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಬೇಕು. ಉಳಿದ ಕಡೆಗಳಲ್ಲಿ ನಡೆಯುತ್ತಿರುವ ಮನೆಗಳ ಕಾಮಗಾರಿಯನ್ನು ಜೂನ್ ಒಳಗೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಎಂಜಿನಿಯರ್ಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ನಿರ್ದೇಶನ ನೀಡಿದರು.
ಈ ಬಗ್ಗೆ ಮಾಹಿತಿ ನೀಡಿದ ಹೆಬಿಟೇಟ್ ಸಂಸ್ಥೆಯ ಎಂಜಿನಿಯರ್ ಶ್ರೀನಿವಾಸ್ ಅವರು ಈಗಾಗಲೇ ಕರ್ಣಂಗೇರಿಯಲ್ಲಿ ೨೫ ಮನೆಗಳ ಕಾಮಗಾರಿ ಶೇ.೮೦ರಷ್ಟು ಪೂರ್ಣಗೊಂಡಿದೆ. ಉಳಿದಂತೆ ಮದೆನಾಡು ಗ್ರಾಮದಲ್ಲಿ ೪೫, ಕರ್ಣಂಗೇರಿ ೧೦ ಹಾಗೂ ಮಾದಪುರದಲ್ಲಿ ೪೩ ಮನೆಗಳ ಕಾಮಗಾರಿ ಮೇಲ್ಛಾವಣಿ ಹಂತ ತಲುಪಿದೆ ಎಂದರು.
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಪ್ರಥಮ ಹಂತದಲ್ಲಿ ೪೧೭ ಕುಟುಂಬಗಳನ್ನು ಆಯ್ಕೆ ಮಾಡಲಾಗಿದೆ. ಎರಡನೇ ಹಂತದಲ್ಲಿ ೪೧೧ ಮನೆಗಳ ಪಟ್ಟಿ ಸಿದ್ಧಪಡಿಸಲಾಗಿದ್ದು, ಒಟ್ಟು ೮೨೯ ಮನೆಗಳನ್ನು ನಿರ್ಮಿಸಲಾಗುತ್ತಿದೆ. ಬಾಕಿ ಇರುವುದನ್ನು ಪಟ್ಟಿ ಮಾಡಿ ಮನೆ ನಿರ್ಮಿಸಲಾಗುವುದು ಎಂದು ಅವರು ಹೇಳಿದರು.
ಸದ್ಯ ೮೨೯ ಮನೆಗಳನ್ನು ನಿರ್ಮಿಸಿ ತ್ವರಿತವಾಗಿ ಮನೆಗಳ ಹಸ್ತಾಂತರ ಮಾಡಬೇಕಿದೆ. ಈಗಾಗಲೇ ಮಾರ್ಚ್ ಅಂತ್ಯದವರೆಗೆ ಬಾಡಿಗೆ ಭರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನ್ಬುಕುಮಾರ್ ಅವರು ಜನ-ಜಾನುವಾರುಗಳಿಗೆ ಕುಡಿಯುವ ನೀರು ವ್ಯತ್ಯಯ ಉಂಟಾಗದಂತೆ ನೋಡಿಕೊಳ್ಳಬೇಕು. ಕುಡಿಯುವ ನೀರಿನ ಸಂಬಂಧ ಸಮಸ್ಯೆಗಳು ಕೇಳಿ ಬಂದಲ್ಲಿ ತಕ್ಷಣವೇ ತಹಶೀಲ್ದಾರ್ರು, ಸಂಬಂಧಪಟ್ಟ ಎಂಜಿನಿಯರ್ಗಳು ಸ್ಥಳಕ್ಕೆ ಭೇಟಿ ನೀಡಿ ಪರಿಹರಿಸಬೇಕು ಎಂದು ಅವರು ಸೂಚಿಸಿದರು.
ಯಾವುದೇ ಕಾರಣಕ್ಕೂ ಕುಡಿಯುವ ನೀರು ಮತ್ತು ಮೇವು ಕೊರತೆ ಉಂಟಾಗಬಾರದು ಎಂದು ಅನ್ಬುಕುಮಾರ್ ಅವರು ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮಾತನಾಡಿ ಕುಶಾಲನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿತ್ತು, ಅದನ್ನು ಸರಿಪಡಿಸಲಾಗಿದೆ. ಹಾಗೆಯೇ ಕೆಲವು ಹಾಡಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯವರ ಗಮನಕ್ಕೆ ತಂದರು.
ಜಿ.ಪಂ.ಸಿಇಒ ಕೆ.ಲಕ್ಷ್ಮಿಪ್ರಿಯಾ ಅವರು ಟಿ.ಶೆಟ್ಟಿಗೇರಿ ಮತ್ತಿತರ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿತ್ತು ಎಂದು ಅವರು ತಿಳಿಸಿದರು.
ಪಂಚಾಯತ್ ಎಂಜಿನಿಯರಿಂಗ್ ವಿಭಾಗ, ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ, ಸಣ್ಣ ನೀರಾವರಿ ಇತರೆ ಇಲಾಖೆಗಳು ಮೂರನೇ ದರ್ಜೆಯವರಿಂದ ಕಾಮಗಾರಿ ಪರಿಶೀಲನೆ ನೆಪದಲ್ಲಿ ಕಾಲ ದೂಡದೆ ಆದಷ್ಟು ತ್ವರಿತವಾಗಿ ಹಣ ಬಳಕೆ ಪ್ರಮಾಣ ಪತ್ರ ನೀಡಬೇಕು ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಜನರಿಗೆ ಸ್ಪಂದಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಸೂಚನೆ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಲೋಕೋಪಯೋಗಿ ಇಲಾಖೆಯ ಇಇ ಇಬ್ರಾಹಿಂ, ಗ್ರಾಮೀಣ ಕುಡಿಯುವ ನೀರು ವಿಭಾಗದ ಎಂಜಿನಿಯರ್ ರೇವಣ್ಣವರ್, ಜಿ.ಪಂ.ಎಂಜಿನಿಯರ್ ಶ್ರೀಕಂಠಯ್ಯ, ಸಹಾಯಕ ಎಂಜಿನಿಯರ್ ಮೇಘನ, ಪಿಎಂಜಿಎಸ್ವೈ ಎಂಜಿನಿಯರ್, ಸಣ್ಣ ನಿರಾವರಿ ಇಲಾಖೆಯ ಎಇಇ ಮಂಜುನಾಥ್, ನಗರಸಭೆ ಎಂಜಿನಿಯರ್ ವನಿತಾ, ಡಿಎಚ್ಒ ಡಾ.ಕೆ.ಮೋಹನ್, ವೈದ್ಯಕೀಯ ಕಾಲೇಜಿನ ನಿರ್ದೇಶಕರಾದ ಕಾರ್ಯಪ್ಪ ಇತರರು ಇದ್ದರು.
No comments
Post a Comment