ಬ್ರಾಹ್ಮಣ, ಒಕ್ಕಲಿಗ ಮತ್ತು ಲಿಂಗಾಯತ ಕೋಟಾದಡಿ ರಾಜ್ಯದ ಮೂವರು ಸಂಸದರನ್ನು ನರೇಂದ್ರ ಮೋದಿ ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತಿದೆ.
ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆಯಾದ ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ಕೋಟಾದಡಿ ಸಂಪುಟ ಸೇರಲಿದ್ದಾರೆ.
ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಮೂವರು ಸಂಸದರಿಗೆ ಕರೆ ಮಾಡಿ ಸಂಜೆ ಪ್ರಮಾಣ ವಚನ ಸ್ವೀಕಾರ ಮಾಡುವಂತೆ ಸೂಚನೆ ನೀಡಿದ್ದಾರೆ. ಅಮಿತ್ ಕರೆ ಬಂದಿರುವುದನ್ನು ಸಂಸದರು ಖಚಿತಪಡಿಸಿದ್ದಾರೆ. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಈಗಾಗಲೇ ದೆಹಲಿ ತಲುಪಿದ್ದು, ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಬೆಂಗಳೂರು ಉತ್ತರ
ಡಿ.ವಿ.ಸದಾನಂದ ಗೌಡ
ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ.ವಿ.ಸದಾನಂದ ಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಸಂಪುಟ ಸೇರಲಿದ್ದಾರೆ. ಒಕ್ಕಲಿಗ ಕೋಟಾದಡಿ ಸದಾನಂದ ಗೌಡರನ್ನು ಆಯ್ಕೆ ಮಾಡಲಾಗಿದೆ.
ಈ ಬಾರಿಯ ಚುನಾವಣೆಯಲ್ಲಿ ಸದಾನಂದ ಗೌಡರು 824500 ಮತಗಳನ್ನು ಪಡೆದು 147518 ಮತಗಳ ಅಂತರದಿಂದ ಗೆಲವು ಸಾಧಿಸಿದ್ದಾರೆ.
ಬೆಳಗಾವಿ ಕ್ಷೇತ್ರ
ಸುರೇಶ್ ಅಂಗಡಿ
ಬೆಳಗಾವಿ ಕ್ಷೇತ್ರದ ಸಂಸದ ಸುರೇಶ್ ಅಂಗಡಿ ಅವರು ಲಿಂಗಾಯತ ಕೋಟಾದಡಿ ಪ್ರಧಾನಿ ನರೇಂದ್ರ ಮೋದಿ ಸಂಪುಟ ಸೇರಲಿದ್ದಾರೆ. ಇಂದು ಸಂಜೆ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ ಸುರೇಶ್ ಅಂಗಡಿ ಅವರು 761991 ಮತಗಳನ್ನು ಪಡೆದು 391304 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ
ಧಾರವಾಡ ಕ್ಷೇತ್ರ
ಪ್ರಹ್ಲಾದ್ ಜೋಶಿ
ಧಾರವಾಡ ಕ್ಷೇತ್ರದ ಸಂಸದ ಪ್ರಹ್ಲಾದ್ ಜೋಶಿ ಅವರು ಬ್ರಾಹ್ಮಣ ಕೋಟಾದಡಿ ನರೇಂದ್ರ ಮೋದಿ ಸಂಪುಟ ಸೇರುತ್ತಿದ್ದಾರೆ. ಇಂದು ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ ಪ್ರಹ್ಲಾದ್ ಜೋಶಿ ಅವರು 684837 ಮತಗಳನ್ನು ಪಡೆದು 205072 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ರಾಜ್ಯಸಭಾ ಸದಸ್ಯರು
ನಿರ್ಮಲಾ ಸೀತಾರಾಮನ್
ರಾಜ್ಯಸಭಾ ಸದಸ್ಯರಾದ ನಿರ್ಮಲಾ ಸೀತಾರಾಮನ್ ಅವರು ನರೇಂದ್ರ ಮೋದಿ ಸಂಪುಟ ಸೇರುತ್ತಿದ್ದಾರೆ. ಕರ್ನಾಟಕ ವಿಧಾನಸಭೆಯಿಂದ ಅವರು ರಾಜ್ಯಸಭಾ ಸದಸ್ಯರಾಗಿದ್ದು, ಕರ್ನಾಟಕ ಕೋಟಾದಡಿ ಸಚಿವರಾಗುತ್ತಿದ್ದಾರೆ.
ನಿರ್ಮಲಾ ಸೀತಾರಾಮನ್ ಅವರು ಪ್ರಧಾನಿ ಮೋದಿ ಸಂಪುಟದಲ್ಲಿ ರಕ್ಷಣಾ ಸಚಿವರಾಗಿ ಕೆಲಸ ಮಾಡಿದ್ದಾರೆ. ಈ ಬಾರಿ ಅವರಿಗೆ ಯಾವ ಖಾತೆ ಸಿಗಲಿದೆ? ಎಂದು ಕಾದು ನೋಡಬೇಕಿದೆ.
ಧನ್ಯವಾದ ತಿಳಿಸಿದ ಸಂಸದರು
ಸುರೇಶ್ ಅಂಗಡಿ ಟ್ವೀಟ್
ಕೇಂದ್ರ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಿರುವುದಕ್ಕೆ ಸುರೇಶ್ ಅಂಗಡಿ ಅವರು ಎಲ್ಲರಿಗೂ ಕೃತಜ್ಞತೆ ಸಲ್ಲಿಸಿ ಟ್ವೀಟ್ ಮಾಡಿದ್ದಾರೆ.