ಸಮುದಾಯ ಸಹಭಾಗಿತ್ವದೊಂದಿಗೆ ವಿಪತ್ತು ಎದುರಿಸಿ:ಅನೀಸ್ ಕಣ್ಮಣಿ ಜಾಯ್

No comments



ಸಮುದಾಯ ಸಹಭಾಗಿತ್ವದೊಂದಿಗೆ ವಿಪತ್ತು ಎದುರಿಸಿ: ಅನೀಸ್ ಕಣ್ಮಣಿ ಜಾಯ್
ಮಡಿಕೇರಿ -ಸ್ಥಳೀಯ ಮಟ್ಟದಲ್ಲಿ ಸಮುದಾಯ ಸಹಭಾಗಿತ್ವದೊಂದಿಗೆ ವಿಪತ್ತು ಎದುರಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.    
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಪತ್ತು ನಿರ್ವಹಣೆ ಸಂಬಂಧ ಸೂಕ್ಷ್ಮ ಪ್ರದೇಶಗಳ 32 ಗ್ರಾ.ಪಂ.ಗಳಿಗೆ ನಿಯೋಜಿಸಿರುವ ನೋಡೆಲ್ ಅಧಿಕಾರಿಗಳು, ಪಿಡಿಒಗಳು ಹಾಗೂ ಕಂದಾಯ ನಿರೀಕ್ಷಕರ ಉಪ ಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು. 
ಗ್ರಾಮ ಮಟ್ಟದಲ್ಲಿ ವಿಪತ್ತು ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸಲು ಸಮುದಾಯ ಸಹಭಾಗಿತ್ವ ಅತ್ಯಗತ್ಯ. ಆ ದಿಸೆಯಲ್ಲಿ ಈಗಾಗಲೇ ರಚಿಸಿರುವ ಸಮಿತಿಯೊಂದಿಗೆ ಚರ್ಚಿಸಿ ಮಾಹಿತಿ ಕ್ರೋಡೀಕರಿಸಿ ಮಾರ್ಗಸೂಚಿಯಂತೆ ಕಾರ್ಯ ನಿರ್ವಹಿಸುವಂತಾಗಬೇಕು ಎಂದರು. 
ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸಂತ್ರಸ್ಥರನ್ನು ಪರಿಹಾರ ಕೇಂದ್ರಕ್ಕೆ ಸ್ಥಳಾಂತರಿಸುವುದು, ಪ್ರಥಮ ಚಿಕಿತ್ಸೆ ಕೊಡುವುದು, ಮನಃಸ್ಥೈರ್ಯ ತುಂಬುವುದು, ನೈರ್ಮಲ್ಯಕ್ಕೆ ಒತ್ತು ನೀಡುವುದು ಮತ್ತಿತರ ಬಗ್ಗೆ ಗಮನಹರಿಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು. 
ಜಿ.ಪಂ.ಸಿಇಒ ಕೆ.ಲಕ್ಷ್ಮಿಪ್ರಿಯಾ ಅವರು ಮಾತನಾಡಿ ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸಮುದಾಯ ಸಹಭಾಗಿತ್ವ ಜೊತೆಗೆ ಇತರೆ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮನ್ವಯತೆ ಸಾಧಿಸಿ, ಮುನ್ನೆಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು ಅವರು ಮಾತನಾಡಿ ವಿಕೋಪ ಸಂದರ್ಭದಲ್ಲಿ ಜಿಲ್ಲಾಡಳಿತ ಕೈಗೊಂಡಿರುವ ಸಿದ್ಧತೆ,  ಈಗಾಗಲೇ ಉಪ ಸಮಿತಿಗಳ ರಚನೆ, ನೋಡಲ್ ಅಧಿಕಾರಿಗಳ ನೇಮಕ, ನೋಡಲ್ ಅಧಿಕಾರಿಗಳ ಜೊತೆಗೆ ಸ್ಥಳೀಯ ಮಟ್ಟದ ಅಧಿಕಾರಿಗಳ ಜೊತೆಗೂಡಿ ಕಾರ್ಯನಿರ್ವಹಿಸುವುದು ಮತ್ತಿತರ ಬಗ್ಗೆ ಹಲವು ಮಾಹಿತಿ ನೀಡಿದರು.
ಯುನೆಸೆಫ್‍ನ  ಸಮಾಲೋಚಕರಾದ ಪ್ರಭಾತ್ ಅವರು ಮಾತನಾಡಿ ಪ್ರಸಕ್ತ ಮುಂಗಾರು ಸಂದರ್ಭದಲ್ಲಿ ತೀವ್ರ ಅತಿವೃಷ್ಟಿಯಿಂದ ಸಂಭವಿಸಬಹುದಾದ ಭೂಕುಸಿತ, ಪ್ರವಾಹ ಎದುರಿಸುವ ನಿಟ್ಟಿನಲ್ಲಿ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಗ್ರಾಮ ಮತ್ತು ಪಂಚಾಯತ್ ಮಟ್ಟದಲ್ಲಿ ಪ್ರವಾಹ ಸಂದರ್ಭದಲ್ಲಿ ಅನಾಹುತ ತಪ್ಪಿಸಲು ಯೋಜನೆ ರೂಪಿಸಲಾಗುತ್ತದೆ ಎಂದರು. ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ನೋಡಲ್ ಅಧಿಕಾರಿಗಳು, ಪಿಡಿಒಗಳು ಇತರರು ಇದ್ದರು.

No comments

Post a Comment