ನಿಫಾ ಜೊತೆಗೆ ಮಳೆಗಾಲದಲ್ಲಿ ಹರಡುವಂತಹ ರೋಗಗಳ ನಿಯಂತ್ರಣ ಬಗ್ಗೆ ಜಾಗೃತಿ ಮೂಡಿಸಿ: ಡಿಸಿ

No comments

ನಿಫಾ ಜೊತೆಗೆ ಮಳೆಗಾಲದಲ್ಲಿ ಹರಡುವಂತಹ ರೋಗಗಳ ನಿಯಂತ್ರಣ ಬಗ್ಗೆ ಜಾಗೃತಿ ಮೂಡಿಸಿ: ಡಿಸಿ

ಮಡಿಕೇರಿ:-ನಿಫಾ ವೈರಾಣು ಬಗ್ಗೆ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವುದರ ಜೊತೆಗೆ ಮಳೆಗಾಲದ ಅವಧಿಯಲ್ಲಿ ಹರಡುವಂತಹ ರೋಗಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಅರಿವು ಮೂಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ನಿರ್ದೇಶನ ನೀಡಿದ್ದಾರೆ.   
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಿಫಾ ವೈರಾಣು ಜ್ವರದ ಕುರಿತು ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳ ಜೊತೆಗೆ ನಡೆದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 
ಸಮೀಪದ ಕೇರಳ ರಾಜ್ಯದಲ್ಲಿ ನಿಫಾ ವೈರಸ್ ಪ್ರಕರಣಗಳು ಕಂಡು ಬರುತ್ತಿರುವುದರಿಂದ ಕೊಡಗು ಜಿಲ್ಲೆಯಲ್ಲಿಯೂ ಸಹ ಕಟ್ಟೆಚ್ಚರ ವಹಿಸಬೇಕಿದೆ. ಆ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ನಿಫಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ವಹಿಸುವ ಬಗ್ಗೆ ಮಾಹಿತಿ ನೀಡಬೇಕು. ಜೊತೆಗೆ ಮಳೆಗಾಲದ ಸಂದರ್ಭದಲ್ಲಿ ಹರಡುಬಹುದಾದ ಡೆಂಗ್ಯು, ಚಿಕನ್‍ಗುನ್ಯ, ಮಲೇರಿಯಾ, ಕಾಮಾಲೆ ಮತ್ತಿತರ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.
ನದಿ ಪಾತ್ರಗಳಲ್ಲಿನ ಗ್ರಾಮಗಳು, ರಬ್ಬರ್ ತೋಟದ ಹಾಗೂ ಹಾಡಿಯ ವ್ಯಾಪ್ತಿಯ ಪ್ರದೇಶಗಳಲ್ಲಿ ಆರೋಗ್ಯ ಅರಿವು ಕಾರ್ಯಕ್ರಮ ಆಯೋಜಿಸುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಅವರು ನಿಫಾ ವೈರಸ್ ಜ್ವರ ಸಂಬಂಧಿಸಿದಂತೆ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತದೆ ಎಂದು ಅವರು ಹೇಳಿದರು.
ಪ್ರಾಣಿಗಳು ಮತ್ತು ಪಕ್ಷಿಗಳು ಕಚ್ಚಿರುವ ಹಣ್ಣುಗಳನ್ನು ತಿನ್ನಬಾರದು. ಬಾವಲಿಗಳು ಅತಿ ಹೆಚ್ಚಾಗಿ ಕಂಡುಬರುವ ಪ್ರದೇಶಗಳಿಂದ ಸಂಗ್ರಹಿಸಿದ ನೀರಾ ಕುಡಿಯಬಾರದು. ಸೋಂಕಿತ ಪ್ರದೇಶಗಳಿಗೆ ಭೇಟಿ ನೀಡುವಾಗ ಪ್ರತಿಬಂಧಕ ಉಪಾಯಗಳನ್ನು ಕೈಗೊಳ್ಳುವುದು, ರೋಗಿಯ ಶರೀರ ಸ್ರಾವದೊಂದಿಗೆ (ಜೊಲ್ಲು, ಬೆವರು, ಮೂತ್ರ ಇತ್ಯಾದಿ) ಸಂಪರ್ಕ ತಪ್ಪಿಸಬೇಕು ಎಂದು ಅವರು ತಿಳಿಸಿದರು.
ಸಾಂಕ್ರಾಮಿಕ ರೋಗಗಳ ನಿಯಂತ್ರಣಾಧಿಕಾರಿ ಡಾ.ಎಂ.ಶಿವಕುಮಾರ್ ಅವರು ಮಾತನಾಡಿ ಹಂದಿ, ಕುದುರೆ, ನಾಯಿ ಮತ್ತು ಬೆಕ್ಕುಗಳಂತಹ ಸೋಂಕಿತ ಜಾನುವಾರುಗಳು ಮಧ್ಯಂತರ ಮೂಲಗಳಾಗಿರುವುದರಿಂದ ಇವುಗಳನ್ನು ಪ್ರತ್ಯೇಕವಾಗಿಡಿ, ಶಂಕಿತ ಪ್ರಕರಣಗಳನ್ನು ಪ್ರತ್ಯೇಕವಾಗಿಡಬೇಕು.
ರೋಗಿಗಳು ಬಳಸುವ ವಸ್ತುಗಳನ್ನು ಪ್ರತ್ಯೇಕವಾಗಿ ಸಾಬೂನು ನೀರು ಬಳಸಿ ಶುಚಿಗೊಳಿಸಬೇಕು. ಸೋಂಕಿತ ಜನರ ಸಂಪರ್ಕಕ್ಕೆ ಬಂದ ನಂತರ ಕೈಗಳನ್ನು ಸರಿಯಾಗಿ ತೊಳೆದುಕೊಳ್ಳಬೇಕು. ರೋಗಿಗಳನ್ನು ಉಪಚರಿಸುವಾಗ ಮಾಸ್ಕ್ ಮತ್ತು ಗ್ಲೌಸ್ ತಪ್ಪದೇ ಬಳಸುವುದು, ಎಲ್ಲಾ ರೀತಿಯ ಹಣ್ಣುಗಳನ್ನು ಚೆನ್ನಾಗಿ ತೊಳೆದು, ಸಿಪ್ಪೆ ಸುಲಿದು ಮತ್ತು ಬೇಯಿಸಿ ತಿನ್ನುವುದು, ಪ್ಲೂ ರೀತಿಯ ಲಕ್ಷಣಗಳು ಕಂಡುಬಂದರೆ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ, ನೆರವಿಗಾಗಿ 104 ಕ್ಕೆ ಕರೆ ಮಾಡುವಂತಾಗಬೇಕು ಎಂದು ಅವರು ಮಾಹಿತಿ ನೀಡಿದರು.
       ಪ್ರಾಣಿಗಳು ಮತ್ತು ಪಕ್ಷಿಗಳು ಕಚ್ಚಿರುವ ಹಣ್ಣುಗಳನ್ನು ತಿನ್ನಬಾರದು, ಬಾವಲಿಗಳು ಅತಿ ಹೆಚ್ಚಾಗಿ ಕಂಡುಬರುವ ಪ್ರದೇಶಗಳಿಂದ ಸಂಗ್ರಹಿಸಿದ ನೀರಾ ಕುಡಿಬಾರದು, ಸೋಂಕಿತ ಪ್ರದೇಶಗಳಿಗೆ ಭೇಟಿ ನೀಡುವಾಗ ಪ್ರತಿಬಂಧಕ ಉಪಾಯಗಳನ್ನು ಕೈಗೊಳ್ಳುವುದು, ರೋಗಿಯ ಶರೀರದ ಸ್ರಾವದೊಂದಿಗೆ(ಜೊಲ್ಲು, ಬೇವರು ಮಾತ್ರ) ಸಂಪರ್ಕ ತಪ್ಪಿಸಿ. ರೋಗ ಹರಡುವ ರೀತಿ ಮತ್ತು ರೋಗ ಲಕ್ಷಣಗಳ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯ ಎಂದರು.  
ನಿಫಾ ವ್ಶೆರಸ್ ಜ್ವರ ಹರಡುವ ವಿಧಾನ:-ಬಾವಲಿಗಳಿಂದ ಪ್ರಾಣಿಗಳಿಗೆ, ಪ್ರಾಣಿಗಳಿಂದ ಹಾಗೂ ಬಾವಲಿಗಳಿಂದ  ಮನುಷ್ಯನಿಗೆ ಹರಡುತ್ತದೆ, ಸೋಂಕಿತ ಬಾವಲಿ ಮತ್ತು ಪ್ರಾಣಿಗಳಿಂದ ಸ್ರವಿಸುವ ದ್ರವಗಳ ನೇರ ಸಂಪರ್ಕ ಹೊಂದುವುದರಿಂದ ಹರಡುತ್ತದೆ, ಸೋಂಕಿತ ಬಾವಲಿ ಮತ್ತು ಪ್ರಾಣಿಗಳ ಸೋಂಕಿತ ಪದಾರ್ಥಗಳನ್ನು ಉಪಯೋಗಿಸುವುದರಿಂದ ಹರಡಬಹುದು ಎಂದು ಅವರು ಮಾಹಿತಿ ನೀಡಿದರು.
ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ತಮ್ಮಯ್ಯ, ಐಟಿಡಿಪಿ ಇಲಾಖೆ ಅಧಿಕಾರಿ ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಅರುಂಧತಿ, ತಾಲ್ಲೂಕು ವೈದ್ಯಾಧಿಕಾರಿಯಾದ ಡಾ.ಎ.ಸಿ.ಶಿವಕುಮಾರ್(ಮಡಿಕೇರಿ) ಡಾ. ಗುರುರಾಜ್(ವಿರಾಜಪೇಟೆ), ಡಾ.ಲೋಕೇಶ್, ಇತರರು ಹಲವು ಮಾಹಿತಿ ನೀಡಿದರು.

No comments

Post a Comment